ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳಾದ ಪ್ರಿಸೈಡಿಂಗ್ ಆಫೀಸರ್ ಹಾಗೂ ಅಸಿಸ್ಟಂಟ್ ಪ್ರಿಸೈಂಡಿಗ್ ಆಫೀಸರ್ಗಳಿಗೆ ಏ.17ರಂದು 2ನೇ ತರಬೇತಿ ನಡೆಯುತ್ತಿರುವ 3 ಸ್ಥಳಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, “ಮತದಾನದ ದಿನ ಮತಗಟ್ಟೆಗಳ ಬಳಿ ನಡೆಯುವ ಎಲ್ಲ ಚಟುವಟಿಕೆಗಳ ಕುರಿತು ಮಾಸ್ಟರ್ ಟ್ರೈನರ್ಗಳು ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸರಿಯಾಗಿ ಅರಿತುಕೊಳ್ಳಬೇಕು” ಎಂದು ತಿಳಿಸಿದರು.
“ಮತದಾನದ ದಿನ ಯಾವುದೇ ಸಮಸ್ಯೆಯಾಗದಂತೆ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವ ಸಮಯದಲ್ಲಿ ವಿವಿ ಪ್ಯಾಟ್, ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯೂನಿಟ್ ಹೇಗೆ ಕಾರ್ಯನಿರ್ವಹಿಸಲಿದೆ. ಯಾವ ರೀತಿ ಕನೆಕ್ಷನ್ ನೀಡಬೇಕು ಎಂಬುದನ್ನು ಸರಿಯಾಗಿ ನೋಡಿಕೋಳ್ಳಬೇಕು” ಎಂದು ಸೂಚನೆ ನೀಡಿದರು.
“ಮತದಾನದ ಕುರಿತು ಹೆಚ್ಚು ಮಾಹಿತಿಗಾಗಿ ಮತಗಟ್ಟೆ ಕೈಪಿಡಿಯನ್ನು ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳ ಕೈಪಿಡಿಯು ಭಾರತ ಚುನಾವಣಾ ಅಯೋಗ ಹಾಗೂ ಕರ್ನಾಟಕ ಚುನಾವಣಾ ಆಯೋಗದ ವೆಬ್ ಸೈಟ್ನಲ್ಲೂ ಲಭ್ಯವಿದ್ದು, ಅಲ್ಲಿಯೂ ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆದುಕೊಳ್ಳಬಹುದು” ಎಂದು ತಿಳಿಸಿದರು.
ಗೈರು ಹಾಜರಾದವರಿಗೆ ಶಿಸ್ತು ಕ್ರಮ
ಎಲ್ಲ ಮತಗಟ್ಟೆಯ ಪ್ರಿಸೈಡಿಂಗ್ ಆಫೀಸರ್ ಹಾಗೂ ಅಸಿಸ್ಟಂಟ್ ಪ್ರಿಸೈಂಡಿಗ್ ಆಫೀಸರ್ಗಳು ತಪ್ಪದೆ ತರಬೇತಿಗೆ ಹಾಜರಾಗಬೇಕು. ಗೈರು ಹಾಜರಾದ ಅಧಿಕಾರಿ/ಸಿಬ್ಬಂದಿ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಶಿಸ್ತು ಕ್ರಮ ಜರುಗಿಸಲು ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುದುರೆಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಧೃಢ; ಡಿ.ಜೆ.ಹಳ್ಳಿ `ರೋಗಪೀಡಿತ ವಲಯ’
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಸಹಾಯಕ ಚುನಾವಣಾಧಿಕಾರಿಗಳಾದ ಚಿದಾನಂದ ಎಸ್. ವಠಾರೆ, ಕಮಲಾ ಬಾಯಿ, ಮಮತಾ ಕುಮಾರಿ, ಮತದರಾರರ ನೋಂದಣಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.




