ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ.
ರಾಜ್ಯದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಆದರೆ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು. ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ಬಂದ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಕಲ್ಲುತೂರಾಟ ನಡೆಸಿ, ಮತ ಯಂತ್ರಗಳನ್ನು ಸುಟ್ಟು ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ಹನೂರಿನ ಮತಗಟ್ಟೆ ಸಂಖ್ಯೆ 146ರಲ್ಲಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಂಡಿತ್ತು. ಶುಕ್ರವಾರ 9 ಮಂದಿಯಷ್ಟೇ ಮತದಾನ ಮಾಡಿದ್ದರು.
ಈ ಮತಗಟ್ಟೆಗೆ ಏ.29ರಂದು ಸೋಮವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದಾರೆ.
ಮತದಾನದ ಬಹಿಷ್ಕಾರದ ವಿಚಾರದಲ್ಲಿ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಉದ್ರಿಕ್ತರು ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಮತಯಂತ್ರಗಳಿಗೆ ಹಾನಿ ಮಾಡಿದ್ದರು. ಅಲ್ಲದೇ, ಈ ಗಲಾಟೆ ವೇಳೆ, ಹಲವು ಮಹಿಳೆಯರಿಗೆ ಗಾಯಗಳಾಗಿದ್ದವು.
ಈ ಘಟನೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಹಾಗೂ ಸಾಮಾನ್ಯ ವೀಕ್ಷಕ ಪಾರ್ಥ ಗುಪ್ತ ಅವರು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು. ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 58 (2) ಮತ್ತು 58 ಎ(2) ಅಡಿಯಲ್ಲಿ ಮರು ಮತದಾನ ಮಾಡಲು ಚುನಾವಣಾ ಆಯೋಗ ತೀರ್ಮಾನ ಮಾಡಿದೆ.
41 ಗ್ರಾಮಸ್ಥರ ವಿರುದ್ಧ ಎಫ್ಐಆರ್
ಶುಕ್ರವಾರ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 41 ಗ್ರಾಮಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಶುಕ್ರವಾರ ತನಿಖಾಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ಪೊಲೀಸರು 25 ಆರೋಪಿಗಳನ್ನು ಬಂಧಿಸಿದ್ದಾರೆ. 15 ಮಹಿಳೆಯರು ಹಾಗೂ 10 ಪುರುಷರನ್ನು ಬಂಧನ ಮಾಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ
ಇಂಡಿಗನತ್ತ ಮತಗಟ್ಟೆ ಪಿಆರ್ಒ ಬಸವಣ್ಣ ಹಾಗೂ ಹನೂರು ತಹಶೀಲ್ದಾರ್ ಗುರುಪ್ರಸಾದ್ ಅವರು ಈ ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ನೀಡಿದ್ದಾರೆ. ಅಧಿಕಾರಿಗಳು ನೀಡಿದ ದೂರಿನ ಅನ್ವಯ 250 ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ ಇಂಡಿಗನತ್ತ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿದೆ. ಬಂಧನ ಭೀತಿಯಿಂದ ಮನೆಗಳನ್ನು ತೊರೆದಿರುವ ಜನರು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಇಂಡಿಗನತ್ತ ಗ್ರಾಮದ ಸಮೀಪ ಇರುವ ಮೆಂದಾರೆ ಗ್ರಾಮದ ಸೋಲಿಗ ಸಮುದಾಯದವರು ಮತಹಾಕಲು ಬಂದಾಗ ಇಂಡಿಗನತ್ತ ಗ್ರಾಮದ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಮತದಾನ ಮಾಡಲು ಅಡ್ಡಿಪಡಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೆಂದಾರೆ ಗ್ರಾಮದ ಜನರು ಪ್ರತಿಭಟನೆ ವೇಳೆ ಒತ್ತಾಯಿಸಿದ್ದಾರೆ.




