ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ನ ವಿಧಾನ ಪರಿಷತ್ತಿನ ಸದಸ್ಯ ರಮೇಶ ಬಾಬು ಅವರು ನಿಯಮ 72ರ ಅಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ.
ಕರ್ನಾಟಕದಲ್ಲಿ ದಲಿತ ಚಳವಳಿಗೆ ವೈಚಾರಿಕವಾಗಿ ಮತ್ತು ಸೈದ್ಧಾಂತಿಕವಾಗಿ ಶಕ್ತಿ ತುಂಬಿದ ಕೀರ್ತಿ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನವರಾದ ಈ ಇಬ್ಬರು ಮಹನೀಯರ ಹೆಸರಿನಲ್ಲಿ ಅವರ ತವರು ನೆಲದಲ್ಲಿ ಅಧ್ಯಯನ ಪೀಠ ಸ್ಥಾಪಿಸುವುದು ಅತ್ಯಂತ ಸೂಕ್ತ ಎಂದು ರಮೇಶ ಬಾಬು ಪ್ರತಿಪಾದಿಸಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?
ಈಗಾಗಲೇ ಈ ಇಬ್ಬರು ನಾಯಕರ ಹೆಸರಿನಲ್ಲಿ ಸ್ಮಾರಕ ಮತ್ತು ಅಧ್ಯಯನ ಕೇಂದ್ರಗಳಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಸಚಿವರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಹರಿಹರ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಸ್ಮಾರಕ ಭವನ (ಸಾಮಾಜಿಕ ಮತ್ತು ಸಾಂಸ್ಕೃತಿಕ ಭವನ) ನಿರ್ಮಾಣಕ್ಕಾಗಿ 2.5 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಪೂರ್ಣ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆಗೆ 2016ರಲ್ಲಿ 1 ಕೋಟಿ ರೂ. ಮಂಜೂರು ಮಾಡಿ, ಬಿಡುಗಡೆಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಬಿ ಬಸವಲಿಂಗಪ್ಪನವರ ಸ್ಮಾರಕ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕಾಗಿ 1 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಇದರಲ್ಲಿ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಸ್ತುತ ಹರಿಹರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಇಬ್ಬರು ನಾಯಕರ ಹೆಸರಿನಲ್ಲಿ ಯಾವುದೇ ಅಧ್ಯಯನ ಪೀಠ ಸ್ಥಾಪನೆಯಾಗಿಲ್ಲ. ಆದಾಗ್ಯೂ, ಈ ಸಂಬಂಧ ಪ್ರಸ್ತಾವನೆಯನ್ನು ಪಡೆದು ಅಧ್ಯಯನ ಪೀಠಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.





