ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷ ಒಳಗೊಂಡ ಮುಂತಾದ ಚಟುವಟಿಕೆಗಳ ಮಧ್ಯೆ ನವೆಂಬರ್ನಲ್ಲಿ ಕರ್ನಾಟಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ ನಂತರ ಈಗ ರಾಜ್ಯ ರಾಜಕೀಯದಲ್ಲಿ ವಿವಿಧ ನಾಯಕರಿಂದ ಬಣ ರಾಜಕೀಯ ಶುರುವಾಗಿದೆ.
ಯತೀಂದ್ರ ಸಿದ್ದರಾಮಯ್ಯ ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಮಾತನಾಡುತ್ತಾ ತಂದೆಯವರು ರಾಜಕೀಯ ಸಂಧ್ಯಾಕಾಲದಲ್ಲಿದ್ದು, ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಿದ್ದರು.
ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, “ನಾನು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಲ್ಲ. ಅದನ್ನು ಜನರು ಮತ್ತು ಪಕ್ಷ ಹೇಳಬೇಕು. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಅರಸು, ನಂತರ ಬಂಗಾರಪ್ಪ ಬಳಿಕ ಸಿದ್ದರಾಮಯ್ಯ ಇದ್ದಾರೆ. ಅವರ ಬಳಿಕ ಯಾರೆಂದು ಮುಂದೆ ಉತ್ತರ ಸಿಗುತ್ತದೆ. ಆದರೆ 2028ಕ್ಕೆ ಕ್ಲೈಮ್ ಮಾಡೋದ್ರಲ್ಲಿ ನಾನೂ ಇದೀನಿ” ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.
ಪಥಸಂಚಲನ ಪಾಲಿಟಿಕ್ಸ್ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?
ಗೃಹ ಸಚಿವ ಡಾ ಜಿ ಪರಮೇಶ್ವರ್ ಈ ಬಗ್ಗೆ ಮಾತನಾಡಿ, “ಸಿದ್ದರಾಮಯ್ಯರು ಅಹಿಂದ ಪ್ರಾರಂಭಿಸಿದಾಗ ಸತೀಶ್ ಜಾರಕಿಹೊಳಿಯವರು ಪ್ರಮುಖ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಅವರ ಹೆಸರು ಹೇಳಿದರೆ ತಪ್ಪೇನಿದೆ?” ಎಂದಿದ್ದಾರೆ.
ಹಾಗೆಯೇ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, “ಯತೀಂದ್ರ ಹೇಳಿರುವ ನಾಯಕತ್ವ ಸತೀಶ್ ಜಾರಕಿಹೊಳಿ ಅವರಲ್ಲಿದೆ. ಒಂದಲ್ಲ ಒಂದು ದಿನ ಅವರು ಸಿಎಂ ಆಗುತ್ತಾರೆ. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು, ಸಿಎಂ ಸಿದ್ದರಾಮಯ್ಯನವರ ದಾರಿಯಲ್ಲೇ ಸತೀಶ್ ಸಾಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
“ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ. ಆದರೆ, ನಮ್ಮಲ್ಲಿ ಈಗ ಸಿಎಂ ಕುರ್ಚಿ ಖಾಲಿ ಇಲ್ಲ. ಯತೀಂದ್ರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಅನ್ನೋದನ್ನು ಗಮನಿಸಬೇಕು. ಸಿದ್ದರಾಮಯ್ಯಗೆ ಕೊನೆ ಚುನಾವಣೆ ಆಗಿರಬಹುದು. ಮುಂದೆಯೂ ಅವರ ನಾಯಕತ್ವ ಅಗತ್ಯವಿದೆ. ಸಿದ್ದರಾಮಯ್ಯ ಅವರನ್ನು ಬಿಟ್ಟು ಚುನಾವಣೆ ಮಾಡೋಕೆ ಆಗಲ್ಲ” ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.





