ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಂಬರ್ ಪತ್ತೆಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎನ್ಐಎ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಇದೀಗ ಮತ್ತೆ ಮೂವರು ಶಂಕಿತರಾದ ಬಳ್ಳಾರಿಯ ಸೈಯದ್ ಸಮೀರ್ (19), ಮುಂಬೈನ ಅನಾಸ್ ಇಕ್ಬಾಲ್ ಶೇಖ್ (23) ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ನನ್ನು (26) ನ್ಯಾಯಾಲಯದ ಆದೇಶದ ಮೇರೆಗೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇನ್ನು ಈಗ ವಶಕ್ಕೆ ಪಡೆದಿರುವ ಶಂಕಿತರು ಐಎಸ್ಐಎಸ್ ಜತೆಗೆ ನಂಟು ಹೊಂದಿದ್ದಾರೆ. ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು 2023ರ ಡಿಸೆಂಬರ್ 18ರಂದು ಮಿನಾಜ್ ಹಾಗೂ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇವರೆಲ್ಲ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಲು ಸಾಲು ರಜೆ: ಊರಿನತ್ತ ಮುಖ ಮಾಡಿದ ಜನ
“ಈ ಮೂವರು ಬಳ್ಳಾರಿಯ ಮಾಡ್ಯೂಲ್ ಕೇಸ್ನ ನಾಲ್ವರು ಆರೋಪಿಗಳಾಗಿದ್ದಾರೆ. ಸದ್ಯ ವಶಕ್ಕೆ ಪಡೆದಿರುವ ಶಂಕಿತರನ್ನು ಎನ್ಐಎ ಅಧಿಕಾರಿಗಳು ಬಳ್ಳಾರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ” ಎಂದು ಮೂಲಗಳು ಹೇಳಿವೆ.




