ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯನ್ನು ರಚನೆ ಮಾಡಿ, ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಮಿತಿಯ ಸಂಚಾಲಕರಾಗಿರುತ್ತಾರೆ. ಹಣಕಾಸು ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿ ಯೋಜನೆ, ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿತ್ತಾರೆ.
ಇದನ್ನು ಓದಿದ್ದೀರಾ? ಪಂಜಾಬ್: ನಾರ್ಕೊ-ಟೆರರಿಸಂ ಕಪಿಮುಷ್ಠಿಯಲ್ಲಿ ಗಡಿರಾಜ್ಯ; ಮನೆ ಬಾಗಿಲಿಗೆ ಡ್ರಗ್ಸ್ ಡೆಲಿವರಿ!
ಸಮಿತಿಯು ಖಾಲಿ ಇರುವ ನಿರ್ಣಾಯಕ(ಕ್ರಿಟಿಕಲ್) ಹುದ್ದೆಗಳನ್ನು ಒಪ್ಪಂದ ಅಥವಾ ಹೊರಗುತ್ತಿಗೆ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಅಧಿಕಾರವನ್ನು ಹೊಂದಿದೆ. ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಅಧಿಕಾರಗಳು ಮತ್ತು ನಿರ್ದಿಷ್ಟ ಕಾರ್ಯಗಳಿಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸುವ ಅಧಿಕಾರವನ್ನು ಹೊಂದಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ತಾಯಂದಿರ ಮರಣ ಅನುಪಾತವನ್ನು 40ಕ್ಕಿಂತ ಕಡಿಮೆ ಮಾಡುವ ಗುರಿಯನ್ನು ಸಾಧಿಸುವಂತೆ ಸಮಿತಿಯು ಕಾರ್ಯನಿರ್ವಹಿಸಬೇಕು. ಎಲ್ಲ ಗರ್ಭಿಣಿ ಮಹಿಳೆಯರಿಗೆ ತಾಯಂದಿರ ಆರೋಗ್ಯ ಸೇವೆಗಳ ಸಾರ್ವತ್ರಿಕ ಲಭ್ಯತೆಯನ್ನು ಖಚಿತಪಡಿಸಬೇಕು. ವಿಶೇಷವಾಗಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ತಾಯಂದಿರ ಆರೋಗ್ಯ ಆರೈಕೆಯ ಅಸಮಾನತೆಗಳನ್ನು ಪರಿಹರಿಸಬೇಕು ಎಂದು ಸಮಿತಿಗೆ ಸೂಚನೆ ನೀಡಲಾಗಿದೆ.





