ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

Date:

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು ಮುಖ್ಯಮಂತ್ರಿ ಹುದ್ದೆಗೇರುವ ಕನಸು ಕಟ್ಟಿಕೊಂಡಿರುವ ನಿರಾಣಿ ಅವರಿಗೆ ಬೀಳಗಿ ಕ್ಷೇತ್ರದ ಮತದಾರರು ಹೇಗೆ ಸ್ಪಂದಿಸಲಿದ್ದಾರೆ ಎಂಬುದೇ ಕುತೂಹಲ. 

ಬಾಗಲಕೋಟೆ ಜಿಲ್ಲೆಯ ಪ್ರತಿಷ್ಠಿತ ಕಣಗಳಲ್ಲಿ ಒಂದಾದ ಬೀಳಗಿ ವಿಧಾನಸಭಾ ಕ್ಷೇತ್ರ ಈ ಬಾರಿಯೂ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ. ಬೀಳಿ ಕ್ಷೇತ್ರದ ಹಾಲಿ ಶಾಸಕ, ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರಿಗೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲು ಎದುರಾಗಿದ್ದರೆ, ಈ ಕ್ಷೇತ್ರವನ್ನು ತನ್ನ ವಶಪಡಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ.

ಸಾಂಪ್ರದಾಯಕ ಎದುರಾಳಿಗಳ ನಡುವೆಯೇ ಈ ಬಾರಿಯೂ ನಿರ್ಣಾಯಕ ಸ್ಪರ್ಧೆ ಇರಲಿದೆ. ಮುರುಗೇಶ್ ನಿರಾಣಿ ಮತ್ತೊಂದು ಬಾರಿ ಗೆಲುವು ಬಯಸಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ ಜೆ ಟಿ ಪಾಟೀಲ, ಎಸ್ ಆರ್ ಪಾಟೀಲ ನಡುವೆ ಟಿಕೆಟ್‌ಗಾಗಿ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಜೆ ಟಿ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನು ಜೆಡಿಎಸ್ ಪಕ್ಷದಿಂದ ರುಕ್ಮುದ್ದೀನ್ ಸೌದಗಲ್ ಕಣದಲ್ಲಿದ್ದಾರೆ.

ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ನಿರಾಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಇ ಸಿವಿಲ್ ಮತ್ತು ಎಂಬಿಎ ಪದವೀಧರರಾದ ಮುರುಗೇಶ್ ನಿರಾಣಿ ಉದ್ಯಮಿ ಮತ್ತು ರಾಜಕಾರಣಿ. ಇವರು 2004ರಲ್ಲಿ ಮೊದಲ ಬಾರಿಗೆ ಬೀಳಗಿ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದರು. 2008ರಲ್ಲಿ ಮತ್ತೆ ಆಯ್ಕೆಯಾದ ನಿರಾಣಿ, ಯಡಿಯೂರಪ್ಪ ಸರ್ಕಾರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದರು. 2008 ರಿಂದ 2013ರವರೆಗೆ ಸಚಿವರಾಗಿ ಬಿಜೆಪಿ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದರೂ ನಿರಾಣಿ 2013ರ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು.

2018ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾದ ನಿರಾಣಿ ಅವರು ಸಚಿವ ಸ್ಥಾನ ಪಡೆಯಲು ಹರಸಾಹಸ ಪಟ್ಟಿದ್ದಾರೆ. 2020ರಲ್ಲಿ ದಾವಣಗೆರೆಯಲ್ಲಿ ನಡೆದ ಹರ ಜಾತ್ರೆಯಲ್ಲಿ ವಚನಾನಂದ ಸ್ವಾಮೀಜಿ ವೇದಿಕೆಯಲ್ಲೇ ನಿರಾಣಿಯವರಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪನವರನ್ನು ಒತ್ತಾಯಿಸಿದ್ದು, ಇದರಿಂದ ಸಿಟ್ಟಾದ ಯಡಿಯೂರಪ್ಪ ವೇದಿಕೆಯಲ್ಲೇ ಅಸಮಾಧಾನ ಹೊರಹಾಕಿದ ಘಟನೆ ರಾಜ್ಯದ ಗಮನ ಸೆಳೆಯಿತು.

ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡ ನಿರಾಣಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಮೇಲೆ ಒತ್ತಡ ಹೇರಿದ್ದರು. ಅಷ್ಟೆಲ್ಲ ಬೆಳವಣಿಗೆಗಳ ಬಳಿಕ ನಿರಾಣಿ ಅವರು ಪ್ರಯಾಸ ಪಟ್ಟು ಕೈಗಾರಿಕಾ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡರು.

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಮುನ್ಸೂಚನೆಯನ್ನು ಮೊದಲೇ ಅರಿತಿದ್ದ ಮುರುಗೇಶ್ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಆದರೆ, ಈ ಬಾರಿಯಾದರೂ ಗೆದ್ದು ಮುಖ್ಯಮಂತ್ರಿ ಹುದ್ದೆಗೇರುವ ಕನಸು ಕಟ್ಟಿಕೊಂಡಿರುವ ನಿರಾಣಿ ಐದನೇ ಬಾರಿಗೆ ಸ್ಪರ್ಧೆಯಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ 7: ಬಡವರ ಓಟು ಕಾಂಗ್ರೆಸ್‌ಗೆ, ಮೇಲ್ಜಾತಿಗಳ ಹೆಚ್ಚು ಓಟು ಬಿಜೆಪಿಗೆ

ನಿರಾಣಿ ವಿರುದ್ಧ ಆಡಳಿತ ವಿರೋಧಿ ಅಲೆ

ಮುರುಗೇಶ್ ನಿರಾಣಿ ಈ ಬಾರಿ ಗೆಲುವು ಸಾಧಿಸುವುದು ಅಷ್ಟು ಸುಲಭವಿಲ್ಲ. ಏಕೆಂದರೆ, ಬೀಳಗಿ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಹಿಂದಿಗಿಂತ ಜೋರಾಗಿಯೇ ಇದೆ. ಕ್ಷೇತ್ರದ ರೈತರೊಂದಿಗೆ ಒಳ್ಳೆಯ ಸಂಬಂಧ ಹೊಂದಿರಬೇಕಾಗಿದ್ದ ನಿರಾಣಿ, ಸ್ಥಳೀಯ ರೈತ ಮುಖಂಡರ ವಿರೋಧ ಕಟ್ಟಿಕೊಂಡಿದ್ದಾರೆ. ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ವಿಮಾನ ನಿಲ್ದಾಣ, ಗ್ಲಾಸ್ ಫ್ಯಾಕ್ಟರಿ ಸ್ಥಾಪನೆಗಾಗಿ 2 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಹಾಗೆಯೇ ಕಬ್ಬು ಬೆಳೆಗಾರರಿಗೆ ಕೊಡಬೇಕಾದ ಬಾಕಿ ಮೊತ್ತವನ್ನು ನಿರಾಣಿ ಉಳಿಸಿಕೊಂಡಿರುವುದರಿಂದ ಅವರ ಮೇಲೆ ರೈತರ ಕಣ್ಣು ಕೆಂಪಾಗಿದೆ. ಈ ಎಲ್ಲ ವಿಚಾರಗಳು ನಿರಾಣಿಗೆ ಮುಳುವಾಗುವ ಸಾಧ್ಯತೆ ಹೆಚ್ಚಿದೆ.

ಪಂಚಮಸಾಲಿ ಲಿಂಗಾಯತ ಸಮುದಾಯ 2ಎ ಮೀಸಲಾತಿಗಾಗಿ ಹೋರಾಟ ನಡೆಸಿತು. ಆದರೆ ನಿರಾಣಿ ಮಾತ್ರ ಮಂತ್ರಿ ಸ್ಥಾನಕ್ಕಾಗಿ ಸಮುದಾಯ ಹಾಗೂ ಸಮುದಾಯದ ಸ್ವಾಮೀಜಿಗಳನ್ನು ಬಳಸಿಕೊಂಡರೆ ಹೊರತು, ಸಮುದಾಯದ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಲಿಲ್ಲ ಎನ್ನುವ ಗುರುತರ ಆರೋಪ ನಿರಾಣಿ ಮೇಲಿದೆ.

ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಜೊತೆಗಿನ ಗುದ್ದಾಟದಲ್ಲಿ ಸ್ವಾಮೀಜಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸಮುದಾಯ ನಿರಾಣಿ ಮೇಲೆ ಕೋಪಗೊಂಡಿದೆ. ಸ್ವತಃ ಸ್ವಾಮೀಜಿ ಅವರು ನಿರಾಣಿ ಕೊಟ್ಟ ಉಡುಗೊರೆಗಳನ್ನು ಟ್ರ್ಯಾಕ್ಟರ್‌ನಲ್ಲಿ ಹೇರಿಸಿ ಕಳುಹಿಸಿದ್ದು ಸಮುದಾಯದ ಕೋಪಕ್ಕೆ ಸಾಕ್ಷಿ. ಜೊತೆಗೆ ಬಿಜೆಪಿಯ ಮತ್ತೋರ್ವ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಕೂಡ ನಿರಾಣಿ ವಿರುದ್ಧ ಸದಾ ಹರಿಹಾಯುತ್ತಲೇ ಇದ್ದಾರೆ.

ಇನ್ನು ಬೀಳಗಿ ಕ್ಷೇತ್ರದಲ್ಲಿ ಕುರುಬ ಸಮುದಾಯ ಮತದಾರರು ಹೆಚ್ಚು ಇದ್ದು, ಈ ಸಮುದಾಯದ ಮತಗಳನ್ನು ಸೆಳೆದರೆ ಮಾತ್ರ ನಿರಾಣಿಗೆ ಗೆಲುವಿನ ಸಾಧ್ಯತೆ ಇದೆ. ಆದರೆ, ಪ್ರತಿಸ್ಪರ್ಧಿ ಅಭ್ಯರ್ಥಿ ರೆಡ್ಡಿ ಸಮುದಾಯಕ್ಕೆ ಸೇರಿರುವುದರಿಂದ ಆ ಜಾತಿಯ ಮತಗಳು ಹೆಚ್ಚು ಸೆಳೆಯಲು ಸಾಧ್ಯವಾಗದೇ ಹೋಗಬಹುದು.

ಒಳ ಮೀಸಲಾತಿ ವಿಚಾರವಾಗಿ ರಾಜ್ಯದಲ್ಲಿ ಬಂಜಾರ ಸಮುದಾಯ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ಬೀಳಗಿ ಕ್ಷೇತ್ರದಲ್ಲೂ ಅದರ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮುಸ್ಲಿ ಸಮುದಾಯಗಳ ಮತಗಳನ್ನಾದರೂ ಅತಿ ಹೆಚ್ಚಿನ ಪ್ರಮಾಣದಲ್ಲಿ ನಿರಾಣಿ ಪಡೆಯಬೇಕಾಗುತ್ತದೆ.

ಇಷ್ಟೆಲ್ಲ ಸೋಲಿನ ಭೀತಿ ಎದುರಿಸುತ್ತಿರುವ ಮುರಗೇಶ್ ನಿರಾಣಿ ಅವರು ಗೆಲ್ಲಲೇ ಬೇಕು ಎನ್ನುವ ಹಠದಿಂದ ಹಣದ ಹೊಳೆ ಹರಿಸಲು ಸಿದ್ದರಾಗಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆ ಸಿಬ್ಬಂದಿ ಕ್ವಾರ್ಟರ್ಸ್ನಲ್ಲಿ ನಿರಾಣಿಗೆ ಸಂಬಂಧಿಸಿದ 21.45 ಲಕ್ಷ ಮೌಲ್ಯದ 963 ಸಾಂಪ್ರದಾಯಿಕ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಚಾರವಾಗಿ ಮುರುಗೇಶ್ ನಿರಾಣಿ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ. ಇನ್ನು ಕೆಲವಡೆ ಆಮಿಷ ಒಡ್ಡುವ ಮೂಲಕ ಮತ ಗಳಿಸಲು ನಿರಾಣಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನಿರಾಣಿ ಬೆಂಬಲಿಗರು ಸಕ್ಕರೆ ಹಂಚಲು ಹೋದವೇಳೆ ಗ್ರಾಮಸ್ಥರ ವಿರೋಧ ಕಂಡುಬಂದಿದೆ.

ಬೀಳಗಿ ಕ್ಷೇತ್ರ
ಬೀಳಗಿ ಕ್ಷೇತ್ರದ ಗಲಗಲಿ ಗ್ರಾಮದಲ್ಲಿ ನಿರಾಣಿ ಅವರ ಬೆಂಬಲಿಗರು ಮನೆ ಮನೆಗೆ ಸಕ್ಕರೆ ಹಂಚಿಕೆ ಮಾಡಲು ಮುಂದಾದ ವೇಳೆ ಮಹಿಳೆಯೊಬ್ಬರು ಸಕ್ಕರೆಯನ್ನು ಸ್ವೀಕರಿಸಲು ನಿರಾಕರಿಸಿದ ದೃಶ್ಯ

ಈ ಸುದ್ದಿ ಓದಿದ್ದೀರಾ? ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಸಾಂಪ್ರದಾಯಕ ಎದುರಾಳಿ ಜೆ ಟಿ ಪಾಟೀಲ ದಾರಿ ಸುಗಮ

ಕ್ಷೇತ್ರದಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಮುರುಗೇಶ್ ನಿರಾಣಿ ವಿರುದ್ಧದ ವಿರೋಧಿ ಅಲೆ ಸಾಂಪ್ರದಾಯಕ ಎದುರಾಳಿ ಕಾಂಗ್ರೆಸ್‌ನ ಜೆ ಟಿ ಪಾಟೀಲ ಅವರ ದಾರಿಯನ್ನು ಮತ್ತಷ್ಟು ಸುಗಮ ಮಾಡಿದೆ.

ಕಾಂಗ್ರೆಸ್‌ನ ಹಿರಿಯ ಹುರಿಯಾಳು ಜೆ ಟಿ ಪಾಟೀಲ ಅವರು ಈ ಕ್ಷೇತ್ರದಿಂದ ಐದು ಬಾರಿ ಸ್ಪರ್ಧಿಸಿ, ಮೂರು ಬಾರಿ ಗೆಲುವು ಕಂಡಿದ್ದಾರೆ. 1994ರಲ್ಲಿಯೇ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದ ಜೆ ಟಿ ಪಾಟೀಲ ಆ ಬಳಿಕ ಮತ್ತೆ ಎರಡು ಬಾರಿ ಶಾಸಕರಾದರು. ಎದುರಾಳಿಯ ಹಣಬಲದ ಎದುರು ಅವರು ಎರಡು ಬಾರಿ ಸೋಲಬೇಕಾಯಿತು. ಈ ಬಾರಿಯೂ ಎದುರಾಳಿ ಅಭ್ಯರ್ಥಿ ಹಣದ ಹೊಳೆ ಹರಿಸಿದರೂ ಗೆಲ್ಲಲು ಬೇಕಾದ ಕಾರ್ಯತಂತ್ರಗಳನ್ನು ಜೆ ಟಿ ಪಾಟೀಲ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಇವೆ.

ಜೆ ಟಿ ಪಾಟೀಲ ಅವರು ಬೀಳಗಿ ಕ್ಷೇತ್ರದ ಜನರೊಟ್ಟಿಗೆ ಬೆರೆಯುವ ರೀತಿ ವಿಶಿಷ್ಟವಾದದು. ಒಬ್ಬ ಜನನಾಯಕ ಜನರೊಟ್ಟಿಗೆ ಹೇಗೆ ಬೆರೆಯಬೇಕು ಎನ್ನುವುದನ್ನು ಅವರು ಮೈಗೂಡಿಸಿಕೊಂಡಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಗಳಲ್ಲೂ ಜನರು ಅವರನ್ನು ಊರ ಮಗನಂತೆ ಕಾಣುತ್ತಾರೆ. ಪ್ರತಿಹಳ್ಳಿಗಳಲ್ಲೂ ಅವರು ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳ ಬಗ್ಗೆ ಜನ ನೆನೆಯುತ್ತಾರೆ. ಇದು ಅವರಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ಹೆಚ್ಚು.

ಜಾತಿಯಿಂದ ಜೆ ಟಿ ಪಾಟೀಲ ರೆಡ್ಡಿ ಸಮುದಾಯಕ್ಕೆ ಸೇರಿದವರು. ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತಗಳನ್ನು ಕ್ರೋಡೀಕರಿಸುವಲ್ಲಿ ಅವರು ಯಶಸ್ವಿಯಾದರೆ, ಕಾಂಗ್ರೆಸ್ ಹಿರಿಯ ಮುಖಂಡ ಎಸ್ ಆರ್ ಪಾಟೀಲ್ ಬೆಂಬಲ ಸಿಕ್ಕರೆ ಪಂಚಮಸಾಲಿ ಲಿಂಗಾಯತ ಮತಗಳು ಇವರತ್ತ ಹರಿದು ಬರಬಹುದು.

ಇನ್ನು ಕ್ಷೇತ್ರದಲ್ಲಿ ಅತಿಹೆಚ್ಚು ಕುರುಬ ಸಮುದಾಯದ ಮತಗಳಿರುವುದರಿಂದ ಆ ಸಮುದಾಯದ ಮತಗಳು ಯಾರ ಕಡೆ ವಾಲುತ್ತವೆ ಎಂಬುದು ಗುಟ್ಟಾಗಿ ಉಳಿದಿದೆ. ಸಿದ್ದರಾಮಯ್ಯ ಕಾರಣಕ್ಕೆ ಕುರುಬ ಮತಗಳು ಪಾಟೀಲರನ್ನು ಕೈ ಹಿಡಿದರೆ ಗೆಲುವು ಸುಲಭವಾಗಲಿದೆ ಎನ್ನುತ್ತಾರೆ ಸ್ಥಳೀಯ ರಾಜಕೀಯ ಬಲ್ಲವರು.

ಈ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧಿಗಳು ಎದುರಾಳಿಯ ಮತ ವಿಂಗಡನೆ ಮಾಡಲು ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಸುವುದು ಸಾಮಾನ್ಯ. ಅದು ಈ ಬಾರಿಯೂ ಮುಂದುವರಿದಿದೆ. ರೈತ ಸಂಘಟನೆ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ವಕೀಲ ಯಲ್ಲಪ್ಪ ನಿಂಗಪ್ಪ ಹೆಗಡೆ ಕಣದಲ್ಲಿದ್ದಾರೆ. ಇವರು ಸಚಿವ ಮುರುಗೇಶ್ ನಿರಾಣಿ ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಅವರ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ. ಇದೀಗ ಈ ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಿ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಆರೋಪ ಮಾಡುತ್ತ ಮತ ಸೆಳೆಯುತ್ತಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಮುಸ್ಲಿಂ ಸಮುದಾಯದ ರುಕ್ಮುದ್ದೀನ್ ಸೌದಗಲ್ ಎನ್ನುವವರು ಕಣದಲ್ಲಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ 2 ಸಾವಿರಕ್ಕಿಂತ ಹೆಚ್ಚು ಮತಗಳನ್ನು ಪಡೆಯಲು ಸಾಧ್ಯವಿಲ್ಲ ಎನ್ನುವ ಮಾತಿದೆ.

ಬಾಗಲಕೋಟೆ, ಬಾದಾಮಿ ಹಾಗೂ ಬೀಳಗಿ ತಾಲೂಕಿನ ಗ್ರಾಮಗಳನ್ನೂ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಮೂರು ತಾಲ್ಲೂಕಿನ ಮತದಾರರು ಯಾರನ್ನು ಶಕ್ತಿಸೌಧಕ್ಕೆ ಕಳುಹಿಸುತ್ತಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...