ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ 30 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಸೋಮವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರೊಂದಿಗೆ ನರಸಾಪುರ ಸಮುದಾಯ ಆರೋಗ್ಯ ಕೇಂದ್ರದ 12.39 ಕೋಟಿ, ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ತೀವ್ರ ನಿಗಾ ಘಟಕ 16 ಕೋಟಿ, ಡಯಾಲಿಸಿಸ್ ಘಟಕ 1.25 ಕೋಟಿ ಸೇರಿದಂತೆ ಒಟ್ಟು 29.64 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳ ನೂತನ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸಿಗಬೇಕಾಗಿದೆ. ಅದೇ ಉದ್ದೇಶದಿಂದ ರಾಜ್ಯದಲ್ಲೇ ಮಾದರಿ ಸೇವೆ ನೀಡುವುದು ನಮ್ಮ ಗುರಿಯಾಗಿದೆ ಎಂದರು.
ಜಿಲ್ಲೆಯ ಜನ ಹೊರಗಡೆ ಚಿಕಿತ್ಸೆಗಾಗಿ ಹೋಗಬಾರದು ಎನ್ನುವ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಲೋಕಾರ್ಪಣೆ ಗೊಳಿಸಲಾಗುತ್ತಿದೆ. ಜೊತೆಗೆ ಆಸ್ಪತ್ರೆ ಉಳಿದ ಜಾಗದಲ್ಲಿ ಪ್ರತ್ಯೇಕವಾದ ಪಾರ್ಕಿಂಗ್ ಮತ್ತು ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಮತ್ತು ಊಟ ಮಾಡಲು ಉದ್ಯಾನವನ ನಿರ್ಮಿಸಲು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ರೋಗಿಗಳನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಆಸ್ಪತ್ರೆಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಬೇಡಿಕೆಗಳ ಪಟ್ಟಿಯನ್ನು ತಯಾರಿಸಿ ಕೊಡಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ನೀಡುವ ಭರವಸೆ ನೀಡಿದರು.
ಇದನ್ನು ಓದಿದ್ದೀರಾ..? ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶ
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಡಾ. ಶ್ರೀನಿವಾಸ್, ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಜಗದೀಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಮುಖಂಡರಾದ ಅಂಕತಟ್ಟಿ ಬಾಬು, ಷಂಷೀರ್, ಬೆಳ್ಳೂರು ಅಶ್ವಥ್, ಕನಕರಾಜು, ನರಸಾಪುರ ನವೀನ್, ಜಾನು ಬಾನು, ನದೀಂ, ಸೇರಿದಂತೆ ಕಾಂಗ್ರೆಸ್ ಮುಖಂಡರು ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.





