ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್ಕೆ ಕೆಫೆ’ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡವು ದೊಡ್ಡ ಪ್ರಮಾಣದ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ ಸುಮಾರು 5 ಗಂಟೆಯ ವೇಳೆಗೆ ಸಂಭವಿಸಿದ ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ರಾಜಕುಮಾರ್ ನಾಮದೇವ ದೊಡ್ಡಮನಿ ಭೋಸಗಾ ಅವರಿಗೆ ಸೇರಿದ ಈ ಕೆಫೆಯನ್ನು ಇತ್ತೀಚೆಗಷ್ಟೇ ಆರಂಭಿಸಲಾಗಿತ್ತು. ಸುಮಾರು 18 ಲಕ್ಷ ರೂಪಾಯಿ ಬಂಡವಾಳ ಹೂಡಿ, ಆಧುನಿಕ ಸೌಲಭ್ಯಗಳೊಂದಿಗೆ ಕೆಫೆ ಆರಂಭಿಸಿದ್ದ ಅವರು, ಉತ್ತಮ ವ್ಯವಹಾರದ ನಿರೀಕ್ಷೆಯಲ್ಲಿದ್ದರು. ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದ ಅಂದಾಜು 7 ರಿಂದ 8 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಉಪಕರಣಗಳು, ಫರ್ನಿಚರ್, ವಿದ್ಯುತ್ ಸಾಧನಗಳು ಸೇರಿದಂತೆ ಅನೇಕ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಗೀಡಾಗಿವೆ.
“ಬದುಕು ಕಟ್ಟಿಕೊಳ್ಳುವ ಕನಸು ಕ್ಷಣಾರ್ಧದಲ್ಲಿ ಭಸ್ಮ”
ಈ ದಿನ.ಕಾಮ್ ಜತೆ ಮಾತನಾಡಿದ ರಾಜಕುಮಾರ್ ತಮ್ಮ ನೋವನ್ನು ಹಂಚಿಕೊಂಡರು. “ನಾನು ಕಡು ಬಡತನದ ಕುಟುಂಬದಲ್ಲಿ ಜನಿಸಿದ್ದೇನೆ. ಪದವಿ ಪಡೆದಿದ್ದರೂ ಉದ್ಯೋಗ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದೆ. ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂಬ ಉದ್ದೇಶದಿಂದ ಫೈನಾನ್ಸ್ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳಿಂದ ಸಾಲ ಪಡೆದು ಸ್ವಂತ ಉದ್ಯಮ ಆರಂಭಿಸಿದ್ದೆ. ಆದರೆ ಬದುಕು ಸುಧಾರಣೆಯಾಗುವ ಮುನ್ನವೇ ಬೆಂಕಿ ಅವಘಡ ಸಂಭವಿಸಿದೆ” ಎಂದು ಕಣ್ಣೀರಿಟ್ಟರು.

“ಬೆಂಕಿಯಿಂದ ನಾಲ್ಕು ಫ್ರಿಜ್, ಲೈಟಿಂಗ್ ವ್ಯವಸ್ಥೆ, ಎಂಟು ಸಿಸಿ ಟಿವಿ ಕ್ಯಾಮೆರಾಗಳು, ಇನ್ವೆರ್ಟರ್, ಟಿವಿ, ಕುರ್ಚಿಗಳು ಹಾಗೂ ಇತರೆ ಅಡುಗೆ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿಗಳು ಸುಟ್ಟು ಹೋಗಿವೆ” ಎಂದು ಅವರು ತಿಳಿಸಿದರು.
“ಒಂದು ಕಡೆ ಲಕ್ಷಾಂತರ ರೂಪಾಯಿ ಸಾಲದ ಹೊರೆ, ಮತ್ತೊಂದು ಕಡೆ ಕುಟುಂಬದ ನೋಡಿಕೊಳ್ಳುವ ಜವಾಬ್ದಾರಿ ರಾಜಕುಮಾರ್ ಅವರ ಮೇಲೆ ಇರುವುದರಿಂದ ಅವರ ಪರಿಸ್ಥಿತಿ ಅತ್ಯಂತ ಸಂಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ದಾನಿಗಳಿಂದ ತಕ್ಷಣ ಆರ್ಥಿಕ ನೆರವು ನೀಡಬೇಕು” ಎಂದು ಸಾರ್ವಜನಿಕರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಿಸದೇ ತಡೆಯಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ ವೈ ಪಟೀಲ್ ಸೇರಿದಂತೆ ಸ್ಥಳೀಯ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ ಮಾಲೀಕರಿಗೆ ಸಾಂತ್ವನ ಹೇಳಿ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ತನಿಖೆ ಮುಂದುವರಿಕೆ
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಅವಘಡದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿದೆ.
ಹೊಸ ಉದ್ಯಮ ಆರಂಭಿಸಿ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ಯುವ ಉದ್ಯಮಿಯ ಬದುಕಿಗೆ ಈ ದುರಂತ ದೊಡ್ಡ ಹೊಡೆತ ನೀಡಿದ್ದು, ಸರ್ಕಾರ ಹಾಗೂ ಸಮಾಜದಿಂದ ನೆರವು ದೊರೆಯುತ್ತದೆಯೇ ಎಂಬ ನಿರೀಕ್ಷೆಯಲ್ಲಿ ಕುಟುಂಬ ಕಾದು ನೋಡುತ್ತಿದೆ.





