ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ ಪ್ರಸನ್ನನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಮಠದ ವಾರ್ಷಿಕೋತ್ಸವ ನಿಮಿತ್ತ ಆಯೋಜಿಸಿದ್ದ ಸಾಮೂಹಿಕ ಉಚಿತ ವಿವಾಹ ಹಾಗೂ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಹಿರಿಯರನ್ನು ಗೌರವಿಸುವ ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ, ಮಾದ್ಯಮಗಳಿಗೆ ಪ್ರತಿಕ್ರಿಸಿದ ಗೀತಾ ಶಿವರಾಜ್ಕುಮಾರ್ ಅವರು, ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ನಡೆಸಲಾಗಿದೆ. ಇಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಜನರು ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಭರವಸೆ ನೀಡಲಾಗಿದೆ. ಅದೇ, ರೀತಿ ಮುಂದಿನ ದಿನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
ನಟ ಶಿವರಾಜ್ಕುಮಾರ್ ಮಾತನಾಡಿ, “ಮಠಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ. ಅದೇ ರೀತಿ, ಇಲ್ಲಿ ಗುರುಗಳ ಭೇಟಿ ಹಾಗೂ ಅವರ ಆಶೀರ್ವಾದ ಪಡೆಯಲಾಯಿತು. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪತ್ನಿ ಗೀತಾ ಪರ ಜನರು ಹೆಚ್ಚಿನ ಬೆಂಬಲ ಸೂಚಿಸುತ್ತಿದ್ದಾರೆ. ಇಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಜನರ ಒಲವು ಗೀತಾ ಅವರಿಗೆ ವ್ಯಕ್ತವಾಗುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ
ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅರ್ ಪ್ರಸನ್ನ ಕುಮಾರ್, ಸೂಡ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಕಲಗೋಡು ರತ್ನಾಕರ, ಭೋವಿ ನಿಗಮ ಅಧ್ಯಕ್ಷ ರವಿಕುಮಾರ್, ರಮೇಶ್ ಹೆಗ್ಡೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.





