ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದು ಸಿದ್ದರಾಮಯ್ಯ ಸರಕಾರದ ದುರುದ್ದೇಶ ಎಂದು ಮಾಜಿ ಉಪ ಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಹೇಳಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿದ ಅವರು, “ಸರ್ಕಾರ ದೋಷದಿಂದ ಕೂಡಿದ ಆದೇಶಗಳನ್ನು ಮಾಡುತ್ತಿದೆ. ಈ ಮೂಲಕ ಪರಿಶಿಷ್ಟ ಜನಾಂಗದವರಿಗೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯರ ಸರಕಾರದ ಆದೇಶವನ್ನು ಪ್ರಶ್ನಿಸಿ ಈಚೆಗೆ ಹೈಕೋರ್ಟಿನಲ್ಲಿ ಕೇಸ್ ಬಂದಾಗ ರಾಜ್ಯ ಸರಕಾರದ ಕಡೆಯಿಂದ ಯಾರೂ ಹಾಜರಾಗಿಲ್ಲ. ಹೀಗಾಗಿ ಆದೇಶ ಭಾಗಶಃ ತಡೆಯಾಗಿದೆ” ಎಂದು ವಿವರಿಸಿದರು.
101 ಜಾತಿಯ ಹಿತ ಕಾಯಲು ಬಯಸುತ್ತಿಲ್ಲ
“ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯನವರು ಆಟ ಆಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೆ ಹೋದಷ್ಟೂ ಅವರಿಗೆ ಒಳ್ಳೆಯದೆಂಬ ಭಾವನೆ ಇದೆ. ಖಜಾನೆ ಖಾಲಿ ಆಗಿದೆ. ನೇಮಕಾತಿ ಮಾಡಲೂ ಅವರು ತಯಾರಿಲ್ಲ” ಎಂದು ದೂರಿದರು.
“ಮತ್ತೆ ಈ ಜನಾಂಗಕ್ಕೆ ಮೋಸ ಮಾಡಲು ಸಿದ್ದರಾಮಯ್ಯರ ಸರಕಾರ ಇವತ್ತು ಸಂಪುಟ ಸಭೆ ನಡೆಸುತ್ತಿದೆ. ಕರಡು ಮಸೂದೆ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. 5ರೊಳಗೆ ಹೈಕೋರ್ಟಿಗೆ ರಾಜ್ಯ ಸರಕಾರ ತನ್ನ ವಾದವನ್ನು ಮಂಡಿಸಲು ಬೇಕಾದ ವಿವರಣೆ ನೀಡಬೇಕಾಗಿದೆ” ಎಂದು ತಿಳಿಸಿದರು.
ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, “ಒಳ ಮೀಸಲಾತಿ ವಿಚಾರದಲ್ಲಿ ಗೊಂದಲಗಳಿವೆ. ಸಂವಿಧಾನಬದ್ಧವಾಗಿ ಯೋಚಿಸದೇ ಈ ರಾಜ್ಯ ಸರಕಾರವು ರಾಜಕೀಯ ತೀರ್ಮಾನ ತೆಗೆದುಕೊಂಡಿದೆ. ಒಂದು ವಾರದಿಂದ ಅಲೆಮಾರಿಗಳ ಮೀಸಲಾತಿ ಕುರಿತ ಚರ್ಚೆ ಮಾಡಲಾಗುತ್ತಿದೆ. ಅಲೆಮಾರಿ ಸಮುದಾಯವು ಪ್ರತ್ಯೇಕ ಮೀಸಲಾತಿ ಕೇಳುತ್ತಿದ್ದಾರೆ. ಅವರು ಪ್ಯಾಕೇಜ್ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ, ಈ ಸರಕಾರವು ಮತ್ತೆ ಮತ್ತೆ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ” ಎಂದು ದೂರಿದರು.
ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಅನಿಲ್ ಕುಮಾರ್, ಲಕ್ಷ್ಮೀನಾರಾಯಣ್ ಅವರು ಉಪಸ್ಥಿತರಿದ್ದರು.





