ರಾಜ್ಯ ಸರ್ಕಾರ ‘ಕೆಪಿಎಸ್ ಮ್ಯಾಗ್ನೆಟ್’ ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಸಂಬಂಧ ವಿವಿಧ ಸಂಘಟನೆಗಳು ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ! ಸಾರ್ವಜನಿಕ ಶಿಕ್ಷಣ ಉಳಿಸಿ, ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿ’ ಎಂಬ ಅಭಿಯಾನ ಆರಂಭಿಸಿವೆ. ಒಂದರಿಂದ ಐದು ಕಿ.ಮೀ ವ್ಯಾಪ್ತಿಯೊಳಗಿನ ಸಣ್ಣ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಅವುಗಳ ಎಲ್ಲಾ ಶಿಕ್ಷಕರನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಈ ಶಾಲೆಗಳಿಗೆ ಮಕ್ಕಳನ್ನು ಕರೆತರಲು ವಾಹನ ಸೌಲಭ್ಯಗಳನ್ನು ಒದಗಿಸಲಾಗುವುದು.

ಸರ್ಕಾರವು ಈ ಶಾಲೆಗಳಿಗೆ ಶಿಕ್ಷಕರು ಮತ್ತು ಉಪನ್ಯಾಸಕರ ಕೇಡರ್ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಶಾಲಾ ನಿರ್ವಹಣೆಯನ್ನು ಹೊರಗುತ್ತಿಗೆ ನೀಡುವ ಮೂಲಕ ಈ ಶಾಲೆಗಳನ್ನು ಬಲಪಡಿಸಲಾಗುವುದು, ಶಾಲೆಗಳು ತಮ್ಮದೇ ಆದ ಮೂಲಗಳಿಂದ ಹಣವನ್ನು ಸಂಗ್ರಹಿಸಲು ಅವಕಾಶ ನೀಡುವುದು, ನಿಧಿ ಸಂಗ್ರಹ ಆಯ್ಕೆಗಳನ್ನು ಒದಗಿಸುವುದು ಮತ್ತು ಶಾಲಾ ನಿರ್ವಹಣಾ ಸಮಿತಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದೆ. ಆದರೇ, ಇದರಿಂದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಈ ಹೊಸ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳು ಒಟ್ಟು: 47,493 ಒಟ್ಟು ಪ್ರಾಥಮಿಕ ಶಾಲೆಗಳು: 19,603, ಉನ್ನತ ಪ್ರಾಥಮಿಕ ಶಾಲೆಗಳು: 21,676, ಪ್ರೌಢಶಾಲೆಗಳು: 4,895, ಸರ್ಕಾರಿ ಪಿಯು ಕಾಲೇಜುಗಳು: 1,319, ಅಸ್ತಿತ್ವದಲ್ಲಿರುವ ಕೆಪಿಎಸ್ ಶಾಲೆಗಳು: 309, ಕಳೆದ ಹತ್ತು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಶೇ.19ರಷ್ಟು ಇಳಿಕೆ, ಕಳೆದ ಹತ್ತು ವರ್ಷಗಳಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಶೇ. 29 ರಷ್ಟು ಹೆಚ್ಚಾಗಿದೆ. ಒಟ್ಟು ದಾಖಲಾತಿ ಅನುಪಾತ (GER): ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 98.65% ; ಉನ್ನತ ಪ್ರಾಥಮಿಕ ಶಾಲೆಗಳಲ್ಲಿ 99.79% ; ಪ್ರೌಢಶಾಲೆಯಲ್ಲಿ 96.08% ಶಾಲೆ ಬಿಡುವ ಪ್ರಮಾಣ: ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 2.50% ; ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 2.91% ; ಪ್ರೌಢಶಾಲೆಗಳಲ್ಲಿ 22.88%ರಷ್ಟಿದೆ.
ಹಾಗೆಯೇ, ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ವಿಲೀನಗೊಳಿಸುವ ಮೂಲಕ ಮುಚ್ಚಲು ಹೊರಟಿರುವ ಸರ್ಕಾರದ ನಡೆಯ ವಿರುದ್ಧ ಅನೇಕ ಸಂಘಟನೆಗಳು ರಾಜ್ಯ ವ್ಯಾಪ್ತಿ ಧ್ವನಿ ಎತ್ತುತ್ತಿವೆ. ಅದೇ ರೀತಿಯಲ್ಲಿ ಹಾಸನ ಭಾಗದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಬಗ್ಗೆ AIDSO ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿದಿನ ಸರ್ಕಾರಿ ಶಾಲೆ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಹಾಗೆಯೇ, ಗೊರೂರು ಜಲಾಶಯ ಪ್ರಾಜೆಕ್ಟ್ ಹತ್ತಿರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಳಿವಿಗಾಗಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರ ಪ್ರತಿಭಟನೆಯನ್ನು ಬುಧವಾರ ನಡೆಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಮುಚ್ಚುವ, ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಹಾಗೂ ಬಡ ವಿದ್ಯಾರ್ಥಿಗಳನ್ನು ಬಾಲ ಕಾರ್ಮಿಕರನ್ನಾಗಿಸುವ ಶಿಕ್ಷಣ ನೀತಿಗಳನ್ನು ಜಾರಿಗೊಳಿಸುತ್ತಿವೆ. ಪ್ರಸ್ತುತ ರಾಜ್ಯ ಸರ್ಕಾರವು ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಎಂಬ ಕರಾಳ ಯೋಜನೆಯಡಿ ಸುಮಾರು ನಲವತ್ತು ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸಂಚು ರೂಪಿಸಿದೆ. ‘ಶಾಲೆಗಳ ಸುಲಲಿತ ಸಮ್ಮಿಳಿತ (Merger) ಎಂಬ ಬಣ್ಣ ಬಣ್ಣ ಮಾತುಗಳ ಮುಸುಕಿನಡಿಯಲ್ಲಿ ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚಿ, ಬಡ ಮಕ್ಕಳ ಭವಿಷ್ಯವನ್ನು ಬಲಿಕೊಟ್ಟು ಅವರನ್ನು ಬಾಲಕಾರ್ಮಿಕರನ್ನಾಗಿ ಮಾಡುವ ಈ ನೀಲಿನಕ್ಷೆಯು ಇಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು AIDSO ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಈದಿನ.ಕಾಮ್ ಜೊತೆ ಮಾತಾಡಿದರು.
ಇದನ್ನೂ ಓದಿದ್ದೀರಾ?ಹಾಸನ | ಬಿಸಿಯೂಟ ಯೋಜನೆ: ಕೆಪಿಎಸ್ ಪಿಯು ವಿದ್ಯಾರ್ಥಿಗಳಿಗೆ ತಾರತಮ್ಯ; AIDSO ಖಂಡನೆ
ಬಡ ರೈತ-ಕಾರ್ಮಿಕರ ಮಕ್ಕಳನ್ನು ಅಜ್ಞಾನದ ಅಂಧಕಾರಕ್ಕೆ ದೂಡುವ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಯೋಜನೆಯನ್ನು ವಿರೋಧಿಸಿ ಜನ ಹೋರಾಟ ನಡೆಯುತ್ತಿರುವ ಈ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಾಗಿದೆ ಎಂದು ಸುಷ್ಮ ಮಾಹಿತಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಚೈತ್ರ, ಗ್ರಾಮಸ್ಥರಾದ ಲೋಕೇಶ್, ರೇಖಾ, ಸಯ್ಯದ್, ಯೋಗೇಂದ್ರ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸರ್ಕಾರಿ ಶಾಲೆ ಉಳಿವಿಗಾಗಿ ಸಿದ್ದರಿದ್ದೇವೆಂದು ಗುರೂರು ಶಾಲೆಯ ಗ್ರಾಮಸ್ಥರು ಬೆಂಬಲಿಸಿದ್ದಾರೆ.





